ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿ ಬಿಸಿರೋಡ್ ಸಮೀಪದ ತಲಪಾಡಿ ಜೋಡು ಮಾರ್ಗ ನಿವಾಸಿ ನಿಜಾಮ್ (33) ಎಂದು ತಿಳಿದು ಬಂದಿದೆ.
ಈತನ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 01/2023 ಕಲಂ 489 (ಬಿ) ಮತ್ತು (ಸಿ) ಜೊತೆಗೆ 34 ಭಾರತೀಯ ದಂಡ ಸಂಹಿತೆರಂತೆ ಪ್ರಕರಣ ದಾಖಲಾಗಿದ್ದು, ನ್ಯಾಯಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಈ ನಡುವೆ ಆರೋಪಿಯು ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದ ಬಳಿಕ, ಪ್ರಕರಣದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ತಿಳಿದುಬಂದಿದೆ.
ನ್ಯಾಯಾಲಯವು ಈತನ ಮೇಲೆ 8 ಬಾರಿ ಬಂಧನ ವಾರಂಟ್ ಹೊರಡಿಸಿದ್ದರೂ ಈತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ.
ತಲೆಮರೆಸಿಕೊಂಡಿದ್ದ ಈತನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ವಾರಂಟ್ ಜಾರಿ ಸಿಬ್ಬಂದಿ ಸೋಮವಾರ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಕಲಂ: 269 ಬಿಎನ್ಎಸ್-2023 ಪ್ರಕಾರ ಕ್ರಮ ಕೈಗೊಂಡು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.