
ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಂಪಲ್ಲಿ ಕೋರ್ಟ್ನಲ್ಲಿ ಈ ಅರ್ಜಿಯ ವಿಚಾರಣೆಯೂ ನಡೆದಿದೆ. ಇಂದು (ಜನವರಿ 03) ನ್ಯಾಯಾಧೀಶರ ಆದೇಶ ಹೊರಬಿದ್ದಿದ್ದು, ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ಜಾಮೀನು ದೊರೆತಿದೆ.
ಡಿಸೆಂಬರ್ 04 ರಂದು ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರಕ್ಕೆ ಅಲ್ಲು ಅರ್ಜುನ್ ಭೇಟಿ ನೀಡಿದ್ದಾಗ ನಡೆದ ಕಾಲ್ತುಳಿತದಲ್ಲಿ ರೇವತಿ ಹೆಸರಿನ ಮಹಿಳೆ ಮೃತಪಟ್ಟಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡು ಈಗಲೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಸಂಬಂಧ ಮೃತ ಮಹಿಳೆಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ಹೈದರಾಬಾದ್ ಪೊಲೀಸರು ಅಲ್ಲು ಅರ್ಜುನ್ ಸೇರಿದಂತೆ ಸಂಧ್ಯಾ ಚಿತ್ರಮಂದಿರ ಮಾಲೀಕ ಹಾಗೂ ಮ್ಯಾನೇಜರ್ ಅನ್ನು ಬಂಧಿಸಿದ್ದರು.
ಅಲ್ಲು ಅರ್ಜುನ್ ಬಂಧನವಾದ ದಿನವೇ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ಮಧ್ಯಂತರ ಜಾಮೀನು ಪಡೆಯಲಾಗಿತ್ತು. ಅಂತೆಯೇ ನಾಂಪಲ್ಲಿ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಹ ಹಾಕಲಾಗಿತ್ತು. ಈ ಹಿಂದೆಯೂ ಒಮ್ಮೆ ಜಾಮೀನು ವಿಚಾರಣೆ ನಡೆದಿದ್ದು, ಆದೇಶವನ್ನು ಜನವರಿ 03 ಕ್ಕೆ ಅಂದರೆ ಇಂದಿಗೆ ಕಾಯ್ದಿರಿಸಲಾಗಿತ್ತು. ಇಂದು ಆದೇಶ ಹೊರಬಿದ್ದಿದ್ದು ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ಜಾಮೀನು ದೊರೆತಿದೆ.