ಮಂಗಳೂರು: ಬಸ್ ಮತ್ತು ರೈಲು ನಿಲ್ದಾಣಗಳು, ಜಾತ್ರೆ, ಕಂಬಳ ನಡೆಯುವ ಸ್ಥಳಗಳಲ್ಲಿ ಪಾರ್ಕ್ ಮಾಡಲಾಗುತ್ತಿದ್ದ ಬೈಕ್ಗಳನ್ನು ಕಳವು ಮಾಡುತ್ತಿದ್ದ ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳವು ಆರೋಪಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಣಿಕಂಠ ಗೌಡ ಕೆ., ಕಾರ್ಕಳದ ಸತೀಶ್ ಬಂಗೇರ, ಮೂಡುಬಿದಿರೆಯ ದೀಕ್ಷಿತ್, ತಾಳಿಕೋಟೆಯ ಸಂಗಣ್ಣ ಹೊನ್ನಳ್ಳಿ ಎಂಬವರನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಂದ 20ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಜೊತೆಗೆ ಕಳ್ಳತನ ಮಾಡಿದ ಬೈಕ್ಗಳನ್ನು ಮಣಿಕಂಠನಿಂದ ಖರೀದಿ ಮಾಡುತ್ತಿದ್ದ ಕಾರ್ಕಳದ ಸತೀಶ್ ಬಂಗೇರ, ಮೂಡುಬಿದಿರೆಯ ದೀಕ್ಷಿತ್, ತಾಳಿಕೋಟೆಯ ಸಂಗಣ್ಣ ಹೊನ್ನಳ್ಳಿ ಎಂಬವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂವರು ಸೂಕ್ತ ದಾಖಲೆಗಳಿಲ್ಲದೆ ವಾಹನಗಳನ್ನು ಪಡೆದು ಮಾರಾಟ ಮಾಡುತ್ತಿದ್ದ ಹಿನ್ನೆಲೆ ಅವರ ಮೇಲೂ ಪ್ರಕರಣ ದಾಖಲು ಮಾಡಲಾಗಿದೆ.
ಆರೋಪಿ ಮಣಿಕಂಠನು ಮಂಗಳೂರು ನಗರ ಪೊಲೀಸ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಬೈಕ್ ಗಳನ್ನ ಕಳವು ಮಾಡುತ್ತಿದ್ದ. ಕದ್ದ ಕೆಲ ಬೈಕ್ಗಳನ್ನು ಮೂಡುಬಿದಿರೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಎಂದು ತಿಳಿದುಬಂದಿದೆ. ಸ್ವತಃ ಮೆಕಾನಿಕ್ ಆಗಿದ್ದ ಮಣಿಕಂಠನು ಇಗ್ನಿಷನ್ ಸಾಕೆಟ್ನ ಪ್ಲಗನ್ನು ಚಾಕಚಕ್ಯತೆಯಿಂದ ತಪ್ಪಿಸಿ, ಕ್ಷಣಾರ್ಧದಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ. ಆತ ಹೆಚ್ಚಾಗಿ ಹೀರೋ ಹೋಂಡಾ ಸ್ಪೆಂಡರ್ ಬೈಕ್, ಆ್ಯಕ್ಟಿವಾ ಸ್ಕೂಟರ್ ಹೀಗೆ ರೀಸೇಲ್ ವ್ಯಾಲ್ಯೂ ಇರುವ ಬೈಕ್ಗಳನ್ನ ಕದಿಯುತ್ತದ್ದ. ಕದ್ದ ನಂತರ ದ್ವಿಚಕ್ರ ವಾಹನಗಳನ್ನು ಕಡಿಮೆ ದರಕ್ಕೆ ಮಾರಾಟ ಮಾಡುತ್ತಿದ್ದ.
ಆರೋಪಿ ಮಣಿಕಂಠ ಸೊರಬ ಮೂಲದವನಾಗಿದ್ದರೂ, ಮೂರ್ನಾಲ್ಕು ವರ್ಷದಿಂದ ಕುಟುಂಬದೊಂದಿಗೆ ಮೂಡುಬಿದಿರೆಯಲ್ಲಿ ವಾಸಿದುತ್ತಿದ್ದ. ಮಂಗಳೂರಿನ ಬಂದರು, ಪಾಂಡೇಶ್ವರ, ಬಜಪೆ, ಮೂಲ್ಕಿ, ಉಳ್ಳಾಲ, ಕಂಕನಾಡಿ ನಗರ ಠಾಣೆ ವ್ಯಾಪ್ತಿಯ 15 ಪ್ರಕರಣ ಮತ್ತು ಬಂಟ್ವಾಳ ನಗರ, ಗ್ರಾಮಾಂತರ, ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ 5 ಪ್ರಕರಣ ಸೇರಿ 20 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾಗಿದ್ದ ಬೈಕ್ ಕಳವು ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎಲ್ಲ ನಾಲ್ವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
